ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ !

21-07-2017
ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕೆರೆ-ಕಟ್ಟೆ, ಹಳ್ಳಕೊಳ್ಳಗಳು ಭರ್ತಿಯಾಗುತ್ತಿವೆ. ನೆರೆಯ ಮಹಾರಾಷ್ಟ್ರದಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರ ಘಟ್ಟ ಪ್ರದೇಶಗಳಲ್ಲಿ ವರ್ಷಧಾರೆ ಮುಂದುವರೆದಿದ್ದು, ಚಿಕ್ಕೋಡಿ ತಾಲ್ಲೂಕಿನ ಕೆಳಮಟ್ಟದ ಆರು ಸೇತುವೆಗಳು ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಕೃಷ್ಣಾ ನದಿಗೆ ಅಡ್ಡಲಾಗಿರುವ ಎಡೂರು -ಕಲ್ಲೋಳ, ದೂದ್ಗಂಗಾ ನದಿಗೆ ಅಡ್ಡಲಾಗಿರುವ ಕಾರದೊಗ-ಭೋಜ್, ಮಲ್ಲಿಕವಾಡ-ದತ್ತವಾಡ, ಬೋಜ್ವಾಡಿ-ಹುನ್ನರಗಿ, ವೇದ್ಗಂಗಾ ನದಿಗೆ ಅಡ್ಡಲಾಗಿರುವ ಅಕ್ಕೋಳ-ಸಿದ್ನಾಳ ಸೇತುವೆ ಮುಳುಗಡೆಯಾಗಿವೆ. ಹಿಪ್ಪರಗಿ ಜಲಾಶಯದಿಂದ 22 ಗೇಟ್ಗಳ ಮೂಲಕ ಅಲಮಟ್ಟಿಗೆ ನೀರು ಹರಿಯಬಿಡಲಾಗುತ್ತಿದೆ. ನದಿಪಾತ್ರದ ಜನರು ಎಚ್ಚರಿಕೆಯಿಂದಿರುವಂತೆ ತಾಲೂಕು ಆಡಳಿತ ಸೂಚಿಸಿದ್ದು, ನದಿಪಾತ್ರದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ. ಸಂಭಾವ್ಯ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದ ಗಡಿಭಾಗದಲ್ಲಿರುವ ನರಸಿಂಹವಾಡಿ ದೇವಸ್ಥಾನ, ಬಂಗಾಲಿ ಬಾಬಾ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳು ಜಲಾವೃತಗೊಂಡಿವೆ. ಮಹಾರಾಷ್ಟ್ರದಲ್ಲಿ ಮಳೆ ಸುರಿಯುತ್ತಿರುವುದರಿಂದ ಚಿಕ್ಕೋಡಿ ಜಿಲ್ಲೆಯಾದ್ಯಂತ ಶಿಥಿಲಗೊಂಡಿರುವ ಕಟ್ಟಡಗಳಲ್ಲಿ ತರಗತಿಗಳನ್ನು ತೆಗೆದುಕೊಳ್ಳಬಾರದೆಂದು ಡಿಡಿಪಿಐ ಸೂಚಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ