‘ಕ್ರೀಡಾಂಗಣವನ್ನು ಬಾಡಿಗೆಗೆ ನೀಡುತ್ತಿಲ್ಲ’

21-02-2018
ಬೆಂಗಳೂರು: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣವನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಾಡಿಗೆ ನೀಡುತ್ತಿಲ್ಲ. ಒಂದು ವೇಳೆ ಅಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆದ ಬಗ್ಗೆ ದಾಖಲೆಗಳನ್ನು ಒದಗಿಸಿದರೆ ಸಂಬಂಧಪಟ್ಟವರಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆ ಸಚಿವ ಯು.ಟಿ.ಖಾದರ್ ಅವರು ವಿಧಾನಪರಿಷತ್ನಲ್ಲಿಂದು ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ನ ಎಂ.ನಾರಾಯಣ ಅವರ ಪ್ರಶ್ನೆಗೆ ಕ್ರೀಡಾಸಚಿವ ಪ್ರಮೋದ್ ಮದ್ವರಾಜ್ ಪರವಾಗಿ ಉತ್ತರ ನೀಡಿದ ಸಚಿವರು, ಕಂಠೀರವ ಒಳಾಂಗಣ ಕ್ರೀಡಾಂಗಣವನ್ನು 10 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಹಾಗಾಗಿ ಕ್ರೀಡಾಂಗಣವನ್ನು ವಾಣಿಜ್ಯ ಚಟುವಟಿಕೆಗಳಿಗೆ ನೀಡುವ ಪ್ರಶ್ನೆಯೇ ಉದ್ಭವಿಸದು ಎಂದು ಹೇಳಿದರು.
ಆದರೆ, ಸಚಿವರ ಉತ್ತರವನ್ನು ಒಪ್ಪದ ನಾರಾಯಣಸ್ವಾಮಿ, ಈಗಲೂ ಕ್ರೀಡಾಂಗಣದಲ್ಲಿ ವಸ್ತುಪ್ರದರ್ಶನ ನಡೆಯುತ್ತಿದೆ. ಸಚಿವರು ತಪ್ಪು ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಆ ಬಗ್ಗೆ ದಾಖಲೆಗಳನ್ನು ಒದಗಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕೋರಮಂಗಲ ಒಳಾಂಗಣ ಕ್ರೀಡಾಂಗಣವನ್ನು ಮಾತ್ರ ಕ್ರೀಡಾ ಚಟುವಟಿಕೆಗಳು ಇಲ್ಲದ ವೇಳೆ ಕ್ರೀಡೇತರ ಚಟುವಟಿಕೆಗಳಿಗೆ ಬಾಡಿಗೆ ಆಧಾರದ ಮೇಲೆ ವಾಣಿಜ್ಯ ಚಟುವಟಿಕೆಗಳಿಗೆ ನೀಡಲಾಗುತ್ತಿದೆ. ಬಾಡಿಗೆ ಹಣವನ್ನು ಸ್ವಚ್ಛತೆ, ಭದ್ರತೆ, ವಿದ್ಯುತ್ ವೆಚ್ಚ ಹಾಗೂ ದೈನಂದಿನ ನಿರ್ವಹಣೆಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.
ಒಂದು ಕಮೆಂಟನ್ನು ಹಾಕಿ